ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ. ಬಿಡುಗಡೆ: ಈಶ್ವರ ಖಂಡ್ರೆ

0

ಬೆಂಗಳೂರು, ಜು 2: ಎಲ್ ನಿ ನೋ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದೆ. ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈಗಾಗಲೇ ಸುಮಾರು 85 ಕೋಟಿ ರೂಪಾಯಿಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ. ವೆಚ್ಚ ಮಾಡಲಾಗಿದೆ. ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ. ಖಾಸಗಿ ತೆರೆದ ಬಾವಿ, ಬೋರ್ ವೆಲ್ ಗಳಿಂದ ನೀರು ಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ತೀರಾ ಅಗತ್ಯಬಿದ್ದ ಸಂದರ್ಭದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 2-3 ದಿನದಿಂದ ಮಳೆ ಆಗುತ್ತಿದೆ. ಕೆಲವು ಜಲಾಶಯಗಳಿಗೆ ನೀರು ಬರುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಜೀವಜಲವನ್ನು ಹಿತಮಿತವಾಗಿ ಜನರು ಬಳಸಬೇಕು. ಪೋಲು ಮಾಡಬಾರದು ಎಂದು ಮನವಿ ಮಾಡಿದ ಅವರು, ಪಂಚಾಯ್ತಿಗಳು ನೀರು ಸೋರಿಕೆ ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here