ಕೃಷಿಗೆ ಅಡಚಣೆ ಇಲ್ಲದೇ ವಿದ್ಯುತ್‌ ಪೂರೈಕೆಗೆ ಸೂಚನೆ

0
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 13-10-2023 ರಂದು ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

1. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡುವಂತೆ ಹಾಗೂ ಲೋಡ್‌ ಶೆಡ್ಡಿಂಗ್‌ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಕಾಂಗಳ ಎಂ.ಡಿ.ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

2. ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್‌ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

3. ಲಭ್ಯವಿರುವ ವಿದ್ಯುತ್ತಿನ ದಕ್ಷ ಹಂಚಿಕೆಯೂ ಅತಿ ಮುಖ್ಯವಾಗಿದ್ದು, ಎಸ್ಕಾಂಗಳ ಎಂ.ಡಿ.ಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಎಲ್ಲ ಮುಖ್ಯ ಎಂಜಿನಿಯರುಗಳನ್ನು ಜಿಲ್ಲೆಗೊಬ್ಬರಂತೆ ನೋಡಲ್‌ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ಅವರು ನಿರಂತರ 5 ಗಂಟೆ ವಿದ್ಯುತ್‌ ಪೂರೈಕೆ ಯಾವುದೇ ಅಡಚಣೆಯಿಲ್ಲದೆ ಆಗುವಂತೆ ಖಾತರಿಪಡಿಸಬೇಕು ಎಂದು ಸೂಚಿಸಿದರು.

4. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆಯಾಗುತ್ತಿರುವುದನ್ನು ಖಾತರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5. ಕಳೆದ ಐದು ವರ್ಷಗಳಿಂದ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ ಹೆಚ್ಚಳ ಕೇವಲ 4000 ಮೆಗಾವ್ಯಾಟ್ ನಷ್ಟು ಮಾತ್ರ ಇದೆ. ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯ 32,000 ಮೆಗಾವ್ಯಾಟ್‌ ಇದ್ದರೂ ಇದರಲ್ಲಿ 16 ಸಾವಿರ ಮೆಗಾವ್ಯಾಟ್‌ ಸೌರ ವಿದ್ಯುತ್‌ ಆಗಿದ್ದು, ಇದು ಹಗಲು ಹೊತ್ತಿನಲ್ಲಿ ಮಾತ್ರ ಉತ್ಪಾದನೆ ಆಗುವುದರಿಂದ ಬೇಡಿಕೆ ನಿರ್ವಹಣೆಯಲ್ಲಿ ವ್ಯತ್ಯಯವಾಗುತ್ತಿದೆ. ಜೊತೆಗೆ ಕಲ್ಲಿದ್ದಲಿನಲ್ಲಿ ಕೆಲವು ಸಮಸ್ಯೆಗಳಿದ್ದುದನ್ನು ನಿವಾರಿಸಲಾಗಿದ್ದು, ಇದೀಗ ಆಮದು ಕಲ್ಲಿದ್ದಲು ಖರೀದಿಗೆ ಟೆಂಡರ್‌ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

6. IEX/ BILATERAL ನಲ್ಲಿ ವಿದ್ಯುತ್‌ ಪಡೆಯಲು ಕ್ರಮ
ನವೆಂಬರ್‌ನಿಂದ ಉತ್ತರ ಪ್ರದೇಶದಿಂದ 300 ಮೆ.ವ್ಯಾ., ಪಂಜಾಬ್‌ ನಿಂದ 600 ಮೆ.ವ್ಯಾ. ವಿದ್ಯುತ್‌ ಪಡೆಯಲಾಗುವುದು. ಕೆ.ಇ.ಆರ್.ಸಿ.. ಅನುಮೋದನೆಯೊಂದಿಗೆ 1500 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

7. ರಾಜ್ಯದಲ್ಲಿನ ವಿದ್ಯುತ್‌ ಉತ್ಪಾದಕರಿಂದ ವಿದ್ಯುತ್‌ ಪಡೆಯಲು ರಾಷ್ಟ್ರೀಯ ವಿಪತ್ತಿನಡಿಯಲ್ಲಿ ವಿದ್ಯುತ್‌ ಕಾಯ್ದೆಯ ಸೆಕ್ಷನ್‌ 11ನ್ನು ಜಾರಿಗೊಳಿಸಲಾಗಿದೆ. ಆ ಮೂಲಕ ವಿದ್ಯುತ್‌ ಕೊರತೆಯನ್ನು ನಿವಾರಿಸಲಾಗುವುದು ಎಂದು ಅಧಿಕಾರಿಗಳು ವಿವರಿಸಿದರು.

9. ದಕ್ಷಿಣದ ಎಲ್ಲ ರಾಜ್ಯಗಳಲ್ಲಿ ವಿದ್ಯುತ್‌ ಕೊರತೆ ತೀವ್ರವಾಗಿದೆ. ಪ್ರತಿ ವರ್ಷ ನೀವು contingency plan ಹೊಂದಿರಬೇಕು. ಯುದ್ಧ ಕಾಲೇ ಶಸ್ತ್ರಾಭ್ಯಾಸ ಎಂಬಂತೆ ಕಾರ್ಯಪ್ರವೃತ್ತರಾದರೆ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಎಚ್ಚರಿಸಿದರು.

10. ಶೇ.13 ರಷ್ಟು ವಿದ್ಯುತ್‌ ವಿತರಣಾ ನಷ್ಟವಾಗುತ್ತಿದೆ. ವಿದ್ಯುತ್‌ ಕಳವು ಗೃಹ ಜ್ಯೋತಿಯಿಂದ ಕಡಿಮೆಯಾಗಿದೆ. ಕೈಗಾರಿಕಾ ವಿದ್ಯುತ್‌ ಕಳವು ಅತಿ ಕಡಿಮೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ.

11. ಕಬ್ಬಿನ ಬೆಳೆಗೆ ನೀರು ಹಾಯಿಸಲು ಕೆಲವು ಜಿಲ್ಲೆಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಬ್ಬಿನ ಕಟಾವು, ಅರೆಯುವಿಕೆ ಪ್ರಾರಂಭವಾದ ಕೂಡಲೇ ಬೇಡಿಕೆ ಇಳಿಕೆಯಾಗಲಿದ್ದು, ಕಬ್ಬು ಅರೆಯುವಿಕೆಯೊಂದಿಗೆ ಕೊ-ಜೆನರೇಶನ್‌ ನಿಂದ ವಿದ್ಯುತ್‌ ಲಭ್ಯವಾಗುತ್ತದೆ ಎಂದು ಸಭೆಗೆ ವಿವರಿಸಲಾಯಿತು.

LEAVE A REPLY

Please enter your comment!
Please enter your name here